ಉಡುಪಿ, ಅ.26: ಕೋಟೇಶ್ವರದ ಎನ್.ಆರ್.ಎ.ಎಂ.ಎಚ್. ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗರ ನೆನಪಿನಲ್ಲಿ ನೀಡಲಾಗುವ 13ನೇ ವರ್ಷದ ‘ಚಡಗ ಕಾದಂಬರಿ ಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಡಾ. ಶ್ರೀಧರ ಎಚ್.ಜಿ. ಮುಂಡಿಗೆಹಳ್ಳಿ ಅವರ ‘ಪ್ರಸ್ಥಾನ’ ಕಾದಂಬರಿ ಆಯ್ಕೆಯಾಗಿದೆ.
ಶ್ರೀಧರ್ ಎಚ್ಜಿಯವರ ‘ಪ್ರಸ್ಥಾನ’ ಕಾದಂಬರಿಯು ಕಳೆದ ಶತಮಾನದ ನಲವತ್ತರ ದಶಕದಲ್ಲಿ ಮಲೆನಾಡು ಅನುಭವಿಸಿದ ಯಾತನೆಯ, ಪ್ರಾಯಶಃ ಹೆಚ್ಚು ಹೃದಯಸ್ಪರ್ಶಿ ಎಂದು ಗುರುತಿಸಬಹುದಾದ ಕಾದಂಬರಿಯಾಗಿದೆ. ಈ ಕಾದಂಬರಿಯನ್ನು ಈ ವರ್ಷದ ಚಡಗ ಕಾದಂಬರಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮೂವರು ತೀರ್ಪುಗಾರರ ಆಯ್ಕೆ ಸಮಿತಿ ತಿಳಿಸಿದೆ ಎಂದು ಸ್ಪರ್ಧೆಯ ಸಂಚಾಲಕರಾದ ಪ್ರೊ.ಉಪೇಂದ್ರ ಸೋಮಯಾಜಿ ತಿಳಿಸಿದ್ದಾರೆ.
ಪ್ರಶಸ್ತಿಯು ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿದೆ. ಪ್ರಶಸ್ತಿಯನ್ನು ಲೇಖಕ ಡಾ.ಶ್ರೀಧರ ಎಚ್. ಜಿ. ಇವರಿಗೆ ನವೆಂಬರ್ ತಿಂಗಳಲ್ಲಿ ಕೋಟದಲ್ಲಿ ಆಯೋಜಿಸಲಾಗುವ ಸಾರ್ವಜನಿಕ ಸಮಾರಂಭದಲ್ಲಿ ನೀಡಿ ಗೌರಸಲಾಗುವುದು ಎಂದು ಪ್ರಶಸ್ತಿ ಸಮಿತಿಯ ಅಧ್ಯಕ್ಷ ಡಾ.ಭಾಸ್ಕರ ಆಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.