ಮಂಗಳೂರು :  ಮಂಗಳೂರು ನಗರದ ನೀರುಮಾರ್ಗದಲ್ಲಿ  ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ. ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ.

ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದು ಜನ ಭಯಭೀತರಾಗುವುದು ಬೇಡಾ ಎಂದು ತಿಳಿಸಿದ್ದಾರೆ. ಈ ಹಂದಿ ಸಾಕಣೆ ಕೇಂದ್ರದಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ.

ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ.  ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು.

ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು.

ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!